
MYSORE : ಆರ್ಸಿಬಿ ವಿಜಯೋತ್ಸವ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಘಟನೆ ಸರ್ಕಾರಕ್ಕೆ ಎಚ್ಚರಿಕೆಯಾಗಿದ್ದು, ಭದ್ರತೆ ಮತ್ತು ನಿರ್ವಹಣೆಯಲ್ಲಿ ಹೆಚ್ಚಿನ ಕಾಳಜಿಯೊಂದಿಗೆ ಮುಂದಾಗುತ್ತಿದೆ. ಹೌದು ಅಕ್ಟೋಬರ್ 2 ರಂದು ಮೈಸೂರಿನಲ್ಲಿ ನಡೆಯಲಿರುವ ಪ್ರಸಿದ್ಧ ದಸರಾ ಜಂಬೂ ಸವಾರಿ ಮೆರವಣಿಗೆಯಲ್ಲಿ ಆಸನ ವ್ಯವಸ್ಥೆಯನ್ನು ಈ ವರ್ಷ 65,000ರಿಂದ 40,000ಕ್ಕೆ ಇಳಿಸಲು ನಿರ್ಧರಿಸಲಾಗಿದೆ.
ಈ ಬಗ್ಗೆ ಮೈಸೂರು ಜಿಲ್ಲಾ ಸಚಿವ ಡಾ. ಎಚ್.ಸಿ. ಮಹದೇವಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದ್ದು, ಪಾಸ್ ಮುದ್ರಣದ ಸಂಖ್ಯೆಯನ್ನೂ ಹೊಂದಾಣಿಕೆಗೆ ತರುವಂತೆ ಸೂಚನೆ ನೀಡಲಾಗಿದೆ. ಪ್ರತಿ ವರ್ಷ ಸಾಮರ್ಥ್ಯಕ್ಕಿಂತ ಹೆಚ್ಚು ಪಾಸ್ಗಳ ಮುದ್ರಣ, ಲಾಬಿ, ಮತ್ತು ಗೊಂದಲಕ್ಕೆ ಕಾರಣವಾಗುತ್ತಿದ್ದ ಹಿನ್ನೆಲೆಯಲ್ಲಿ, ಈ ಬಾರಿ ಉಪಸಮಿತಿ ಆಸನ ಲಭ್ಯತೆಗಷ್ಟೇ ಮಿತಿಪಡಿಸಿ ಪಾಸ್ ವಿತರಣೆ ಮಾಡಲು ತೀರ್ಮಾನಿಸಿದೆ.
ವಿಜಯದಶಮಿ ದಿನದಂದು ನಡೆಯುವ ಜಂಬೂ ಸವಾರಿ ಮೆರವಣಿಗೆಗೆ ಲಕ್ಷಾಂತರ ಮಂದಿ ಆಗಮಿಸುತ್ತಾರೆ. ಚಾಮುಂಡೇಶ್ವರಿ ದೇವಿಯ ಚಿನ್ನದ ಅಂಬಾರಿ, ರಾಜವತ್ತಿಕ ಮೆರವಣಿಗೆ ನೋಡಲು ಬರುವ ಸಾರ್ವಜನಿಕರ ಸುರಕ್ಷೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.




