ಬೆಳಗಾವಿ : ವರದಕ್ಷಿಣೆ ಕಿರುಕುಳ ಹಾಗೂ ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ಮಹಿಳೆಯನ್ನು ಭೀಕರವಾಗಿ ಹತ್ಯೆ ಮಾಡಿ, ಅಪಘಾತವೆಂದು ಬಿಂಬಿಸಲು ಯತ್ನಿಸಿದ ಮಹಿಳೆಯ ಪತಿ, ಮಾವ ಹಾಗೂ ಅತ್ತೆಯನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಗಡಿಯ ಮಲಬಾದ ಗ್ರಾಮದಲ್ಲಿ ನಡೆದಿದೆ. ಮಲಬಾದ ಗ್ರಾಮದ ರೇಣುಕಾ ಹೊನಕಾಂಡೆ (27) ಮೃತ ದುರ್ದೈವಿಯಾಗಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ಸಂತೋಷ್ ಹೊನಕಾಂಡೆ, ಮಾವ ಕಾಮಣ್ಣ ಹೊನಕಾಂಡೆ ಹಾಗೂ ಅತ್ತೆ ಜಯಶ್ರೀ ಎಂಬುವವರನ್ನು ಅಥಣಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಮಹಿಳೆಯನ್ನು ಬೈಕ್ ಮೇಲೆ ಕರೆದುಕೊಂಡು ಹೋಗಿ ಬೈಕ್ ಚಕ್ರಕ್ಕೆ ಸೀರೆ ಸಿಲುಕಿ ಸಾವನ್ನಪ್ಪಿದ್ದಾಳೆ ಎಂದು ಬಿಂಬಿಸಲು ಪ್ರಯತ್ನಿಸಿದ್ದು, ಸಂಶಯಸ್ಪಾದವಾಗಿ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಈ ಕೃತ್ಯ ಬೆಳಕಿಗೆ ಬಂದಿದೆ.
ಸದ್ಯ ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.