Bangalore Stampede : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಕಪ್ ಗೆದ್ದ ಬೆನ್ನಲ್ಲೇ ಬೆಂಗಳೂರಿ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ವಿಜಯೋತ್ಸವ ಮತ್ತು ಸನ್ಮಾನ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ವೇಳೆ ನೂಕುನುಗ್ಗಲಿನಲ್ಲಿ ಕಾಲ್ತುಳಿತವಾಗಿ 11 ಮಂದಿ ಸಾವನ್ನಪ್ಪಿದ್ದರು. ಈ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಮಿಷನರ್ ದಯಾನಂದ್ ಸೇರಿ ಐವರನ್ನು ಸರ್ಕಾರ ಹೊಣೆ ಮಾಡಿ ಅಮಾನತು ಮಾಡಲಾಗಿತ್ತು. ಇದಾದ ಬಳಿಕ ಈಗ ವಿರಾಟ್ ಕೊಹ್ಲಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಘಟನೆ ಸಂಬಂಧ ಕೊಹ್ಲಿ ವಿರುದ್ಧವೂ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ, ನೈಜ ಹೋರಾಟಗಾರರ ವೇದಿಕೆ ಪದಾಧಿಕಾರಿಗಳು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಶುಕ್ರವಾರ ದೂರು ಕೊಟ್ಟಿದ್ದಾರೆ. ಈ ಸಂಬಂಧ ಪೊಲೀಸರು ದೂರಿನ ಪ್ರತಿ ಪಡೆದು, ಹಿಂಬರಹ ನೀಡಿದ್ದಾರೆ ಎನ್ನಲಾಗಿದೆ. ಕಾಲ್ತುಳಿತದ ಸಂಬಂಧ ಈಗಾಗಲೇ ದಾಖಲಾಗಿರುವ ಎಫ್ಐಆರ್ಗಳ ಜೊತೆಗೆ ಈ ದೂರನ್ನು ತನಿಖೆಗೆ ಪರಿಗಣಿಸುವುದಾಗಿ ಪೊಲೀಸರು ತಿಳಿಸಿದ್ದು, ನೈಜ ಹೋರಾಟಗಾರರ ವೇದಿಕೆಯ ಎಂ.ವೆಂಕಟೇಶ್ ಅವರಿಗೆ ಹಿಂಬರಹ ನೀಡಲಾಗಿದೆ.
ಅಲ್ಲದೇ, ಹೈಕೋರ್ಟ್ ಕೂಡ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದೆ. ಜೊತೆಗೆ, ರಾಜ್ಯ ಸರ್ಕಾರವು ಮ್ಯಾಜಿಸ್ಟ್ರೇಟ್ ಹಾಗೂ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದ ಏಕಸದಸ್ಯ ಆಯೋಗ ರಚಿಸಿ, ತನಿಖೆಗೆ ಆದೇಶ ಹೊರಡಿಸಿದೆ. ಪ್ರಕರಣದ ಬೆನ್ನಲ್ಲೇ ಕರ್ತವ್ಯ ವೈಫಲ್ಯ ಆರೋಪದ ಮೇಲೆ ನಗರ ಪೊಲೀಸ್ ಕಮಿಷನರ್ ಸೇರಿದಂತೆ ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಇತ್ತ ಸಿಐಡಿ ಕೂಡ ಪ್ರಕರಣದ ತನಿಖೆಯನ್ನು ಮಾಡುತ್ತಿದೆ.