BANGALORE: ಜೂನ್ 4 ರಂದು ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಆರ್ಸಿಬಿ (RCB) ತಂಡದ ವಿಜಯೋತ್ಸವ ಸಂಭ್ರಮಾಚರಣೆಯ ವೇಳೆ ಸಂಭವಿಸಿದ ಭೀಕರ ಕಾಲ್ತುಳಿತ ಘಟನೆಯಲ್ಲಿ 11 ಜನರು ದುರ್ಮರಣಕ್ಕೀಡಾದ ದುರಂತದ ಬಳಿಕ, ಕರ್ತವ್ಯ ಲೋಪದ ಆರೋಪದಡಿ ರಾಜ್ಯ ಸರ್ಕಾರ ಬೆಂಗಳೂರು ನಗರ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ವಿಕಾಶ್ ಕುಮಾರ್ ವಿಕಾಶ್ ಅವರನ್ನು ಅಮಾನತುಗೊಳಿಸಿ, ಅವರ ಸ್ಥಾನಕ್ಕೆ ಹಿರಿಯ ಐಪಿಎಸ್ ಅಧಿಕಾರಿಯಾದ ಸಿ. ವಂಶಿಕೃಷ್ಣ ಅವರನ್ನು ನೇಮಕಗೊಳಿಸುವಂತೆ ಸರ್ಕಾರ ಇಂದು ಅಧಿಕೃತ ಆದೇಶ ಹೊರಡಿಸಿದೆ.
ಎಂ. ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭ್ರಮಾಚರಣೆ ವೇಳೆ ಸೂಕ್ತ ಭದ್ರತಾ ವ್ಯವಸ್ಥೆ ಕೈಗೊಳ್ಳದ ಕಾರಣ ಈ ದುರಂತ ಸಂಭವಿಸಿದೆ ಎಂದು ವರದಿಗಳು ಸೂಚಿಸುತ್ತಿವೆ. ಪ್ರಕರಣದಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್, ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ ವಿಕಾಶ್ ಸೇರಿದಂತೆ ಮೂವರು ಐಪಿಎಸ್ ಅಧಿಕಾರಿಗಳು ಹಾಗೂ ಕಬ್ಬನ್ ಪಾರ್ಕ್ ಠಾಣೆಯ ಸಿಬ್ಬಂದಿಯನ್ನು ಸರ್ಕಾರ ಅಮಾನತುಗೊಳಿಸಿದೆ.
ಹಿರಿಯ ಐಪಿಎಸ್ ಅಧಿಕಾರಿ ಸಿ. ವಂಶಿಕೃಷ್ಣ ಅವರಿಗೆ ಈಗ ಹೆಚ್ಚುವರಿ ಪೊಲೀಸ್ ಆಯುಕ್ತ ಹುದ್ದೆಯ ಜವಾಬ್ದಾರಿ ನೀಡಲಾಗಿದೆ. ಅವರು ಇಂದಿನಿಂದಲೇ ತಮ್ಮ ಹೊಸ ಕರ್ತವ್ಯಕ್ಕೆ ಪದಗ್ರಹಣ ಮಾಡಲಿದ್ದಾರೆ