ಬೆಂಗಳೂರು: ರಾಜ್ಯ ಸರ್ಕಾರದಿಂದ ತಂಬಾಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ನೂತನ ಗಜೇಟ್ ಆದೇಶವನ್ನು ಜಾರಿಗೊಳಿಸಲಾಗಿದೆ. ಈ ಆದೇಶದ ಪ್ರಕಾರ, ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇದಿದರೆ ಅಥವಾ ಗುಟ್ಕಾ ಉಗುಳಿದರೆ ₹1,000 ದಂಡ ವಿಧಿಸಲಾಗುತ್ತದೆ.
ಈ ನಿಯಮದ ಅಡಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಬಳಕೆ ಸಂಪೂರ್ಣವಾಗಿ ನಿಷಿದ್ಧವಾಗಿದ್ದು, ಸಾರ್ವಜನಿಕ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ತೀವ್ರ ಕ್ರಮ ಕೈಗೊಂಡಿದೆ. ಅಲ್ಲದೇ, 21 ವರ್ಷಕ್ಕಿಂತ ಕಡಿಮೆ ವಯಸ್ಸಿನ ಯುವಕರಿಗೆ ಬೀಡಿ, ಸಿಗರೇಟು ಹಾಗೂ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದನ್ನು ಕೂಡ ನಿಷೇಧಿಸಲಾಗಿದೆ. ಈ ನಿಯಮ ಉಲ್ಲಂಘಿಸಿದರೆ ಮಾರಾಟದವರಿಗೂ ₹1,000 ದಂಡ ವಿಧಿಸಲಾಗುವುದು.
ಸಾರ್ವಜನಿಕ ಆರೋಗ್ಯವನ್ನು ಸುಧಾರಿಸುವ ಮತ್ತು ತಂಬಾಕು ಸೇವನೆಯ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯ ಸರ್ಕಾರ ಕಳಿಸಿದ್ದ ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಮಸೂದೆ2024ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇದೇ 23ರಂದು ಅಂಕಿತ ಹಾಕಿದರು. ಈ ಸಂಬಂಧ ರಾಜ್ಯಪತ್ರದಲ್ಲಿ ಅಧಿಸೂಚನೆ ಹೊರಡಿಸಿ, ಇಂದಿನಿಂದ ಕಾಯ್ದೆ ಜಾರಿಗೆ ತರಲಾಗಿದೆ