ಬಳ್ಳಾರಿ : ಕೃಷಿ ಹೊಂಡಕ್ಕೆ ಬಿದ್ದು 13 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ಕರ್ಚಿಗನೂರು ಗ್ರಾಮದಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಸಿರುಗುಪ್ಪ ತಾಲೂಕಿನ ಕರ್ಚಿಗನೂರು ಗ್ರಾಮದಲ್ಲಿ ಕುರಿ ಮೇಯಿಸಲು ತೆರಳಿದ್ದ ವೀರೇಶ್ ಎಂಬ 13 ವರ್ಷದ ಬಾಲಕ, ನೀರು ಕುಡಿಯಲು ಹೋದ ಸಂದರ್ಭದಲ್ಲಿ ಆಯತಪ್ಪಿ ಕೃಷಿಹೊಂಡಕ್ಕೆ ಬಿದ್ದು ಮೃತಪಟ್ಟಿದ್ದಾನೆ. ಘಟನೆ ಬಳಿಕ ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬಾಲಕನ ಮೃತದೇಹವನ್ನು ಕೃಷಿಹೊಂಡದಿಂದ ಹೊರತೆಗೆದಿದ್ದಾರೆ.
ಇನ್ನು ಈ ಸಂಬಂಧ ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ. ಈ ಘಟನೆ ಗ್ರಾಮಸ್ಥರಲ್ಲಿ ದುಃಖದ ಛಾಯೆ ಮೂಡಿಸಿದೆ.