ದಕ್ಷಿಣ ಕನ್ನಡ:
ಭಾರತೀಯ ಚಿತ್ರರಂಗದ ಹೆಸರಾಂತ ಹಿನ್ನೆಲೆ ಗಾಯಕಿ ಎಸ್. ಜಾನಕಿಯವರು ಗುರುವಾರ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ, ಬಳಿಕ ಶ್ರೀ ಸಂಪುಟ ಸುಬ್ರಮಣ್ಯ ಮಠಕ್ಕೆ ಭೇಟಿ ನೀಡಿದ್ದಾರೆ.
ಎಸ್.ಜಾನಕಿ ಅವರಿಗೆ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಯೇಸುರಾಜ್ ಹಾಗೂ ಸುಬ್ರಹ್ಮಣ್ಯದ ನಾಗರಿಕರ ಪರವಾಗಿ ಗ್ರಾಮ ಪಂಚಾಯಿತಿ ಸದಸ್ಯ ಹರೀಶ ಇಂಜಾಡಿಯವರು ಶಾಲು, ಪ್ರಸಾದ, ನೆನಪಿನ ಕಾಣಿಕೆ ನೀಡಿ ಗೌರವಿಸಿದ್ದಾರೆ.
ಜಾನಕಿ ಯವರಿಗೆ ನಾಲ್ಕು ರಾಷ್ಟ್ರ ಪ್ರಶಸ್ತಿಗಳು ಸೇರಿದಂತೆ ಸುಮಾರು 30 ರಾಜ್ಯ ಪ್ರಶಸ್ತಿಗಳೂ ದೊರೆತಿವೆ. ಮೈಸೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ನೀಡಿ ಸನ್ಮಾನಿಸಿದೆ. 2013ರಲ್ಲಿ ಭಾರತ ಸರ್ಕಾರವು ಪದ್ಮಭೂಷಣ ಪ್ರಶಸ್ತಿ ಘೋಷಿಸಿತ್ತು. ಆದರೆ ಜಾನಕಿಯವರು ಈ ಪ್ರಶಸ್ತಿಯನ್ನು ಅಂದು ತಿರಸ್ಕರಿಸಿದ್ದರು. ಇವರು ಸುಮಾರು 50 ಸಾವಿರಕ್ಕೂ ಹೆಚ್ಚಿನ ಹಾಡುಗಳನ್ನು ಹಾಡಿದ್ದಾರೆ. ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ಕ್ರಮವಾಗಿ ಹೆಚ್ಚಿನ ಹಾಡುಗಳನ್ನು ಹಾಡಿದ್ದಾರೆ. ಒಟ್ಟು 12 ಕ್ಕೂ ಹೆಚ್ಚಿನ ಭಾರತೀಯ ಭಾಷೆಗಳಲ್ಲಿ ಹಾಡಿದ್ದಾರೆ.