DELHI : ಮೂರು ತಿಂಗಳಿಗೂ ಅಧಿಕ ಅವಧಿಯ ವಿರಾಮದ ಬಳಿಕ, ಸಂಸತ್ನ ಮುಂಗಾರು ಅಧಿವೇಶನ (Parliament Monsoon Session) ಜುಲೈ 21ರಿಂದ ಆಗಸ್ಟ್ 12ರ ವರೆಗೆ ನಡೆಯಲಿದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.
ಅಧಿವೇಶನದ ಮೊದಲ ದಿನ, ಜುಲೈ 21ರಂದು ಬೆಳಗ್ಗೆ 11 ಗಂಟೆಗೆ ರಾಜ್ಯಸಭೆ ಮತ್ತು ಲೋಕಸಭೆ ಎರಡೂ ಸಭೆ ಸೇರಲಿವೆ. ಈ ಕುರಿತು ಮಾಹಿತಿ ನೀಡಿದ ರಿಜಿಜು, "ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ನಡೆದ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿಯು ಅಧಿವೇಶನದ ದಿನಾಂಕಗಳನ್ನು ಶಿಫಾರಸು ಮಾಡಿದೆ," ಎಂದು ತಿಳಿಸಿದ್ದಾರೆ.
ಮುಂಗಾರು ಅಧಿವೇಶನದಲ್ಲಿ ದೇಶದ ಆರ್ಥಿಕ ಪರಿಸ್ಥಿತಿ, ಕೃಷಿ, ರಕ್ಷಣಾ ನೀತಿ, ಗಡಿ ಭದ್ರತೆ, ಜನತೆ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳು ಸೇರಿದಂತೆ ಹಲವು ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದೆ. ಅಲ್ಲದೇ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ತಾಣಗಳನ್ನ ಗುರಿಯಾಗಿಸಿಕೊಂಡು ಭಾರತ ನಡೆಸಿದ ಸೇನಾ ಕಾರ್ಯಾಚರಣೆ ಆಪರೇಷನ್ ಸಿಂಧೂರ್ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನ ಕರೆಯಬೇಕೆಂಬ ವಿರೋಧ ಪಕ್ಷದ ನಾಯಕರ ಬೇಡಿಕೆಯ ಮಧ್ಯೆ ಈ ಘೋಷಣೆ ಬಂದಿದೆ.
ಅಧಿವೇಶನದ ವೇಳೆ ಹಲವು ಮಸೂದೆಗಳು ಮಂಡನೆಯಾಗುವ ನಿರೀಕ್ಷೆಯಿದ್ದು, ವಿರೋಧ ಪಕ್ಷಗಳು ಸಹ ಬಹುಮಾನ್ಯ ವಿಚಾರಗಳಲ್ಲಿ ಸರ್ಕಾರವನ್ನು ಕಠಿಣವಾಗಿ ಪ್ರಶ್ನಿಸುವ ಸಾಧ್ಯತೆ ಇದೆ.