ಶಿರಾ : ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಜನೌಷಧಿ ಯೋಜನೆಯನ್ನು ರಾಜ್ಯ ಸರ್ಕಾರ ಬಂದ್ ಮಾಡಿದೆ. ಬಡವರು ಕಡಿಮೆ ಬೆಲೆಯಲ್ಲಿ ಔಷಧಿಗಳನ್ನು ಜನ ಪಡೆಯುತ್ತಿದ್ದರು. ಆದರೆ, ಸರ್ಕಾರದ ಈ ಧೋರಣೆಯಿಂದಾಗಿ ಬಡವರಿಗೆ ಅನ್ಯಾಯವಾಗುತ್ತಿದೆ ಎಂದು ಚಿತ್ರದುರ್ಗದ ಸಂಸದ ಗೋವಿಂದ ಕಾರಜೋಳ ಕಿಡಿಕಾರಿದರು.
ಶಿರಾ ನಗರದಲ್ಲಿ ಸಂಸದ ಗೋವಿಂದ ಕಾರಜೋಳ ನೇತೃತ್ವದಲ್ಲಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಾಯಿತು. ನಂತರ ಬಿಜೆಪಿ ಕಚೇರಿಯಲ್ಲಿ ಸಂಸದರು, ಮುಖಂಡರು, ಕಾರ್ಯಕರ್ತ ಸಭೆ ನಡೆಸಿದರು. ಈ ವೇಳೆ ಸಂಸದ ಕಾರಜೋಳ ಮಾತನಾಡಿ, ರಿಯಾಯಿತಿ ದರದಲ್ಲಿ ಬಡವರಿಗೆ ಔಷಧ ಸಿಗಬೇಕು ಎನ್ನುವ ಕಾರಣಕ್ಕೆ ಪ್ರಧಾನಿ ಮೋದಿ ಜನೌಷಧಿ ಕೇಂದ್ರವನ್ನು ಸ್ಥಾಪನೆ ಮಾಡಿದರು. ಶೇಕಡ 25 ರಷ್ಟು ರಿಯಾಯಿತಿ ದರದಲ್ಲಿ ಔಷಧಿಗಳನ್ನು ನೀಡಲಾಗುತ್ತಿತ್ತು. ಆದರೆ ಸಿದ್ದರಾಮಯ್ಯ ಸರ್ಕಾರ ಬಡವರ ಸಿಗುತ್ತಿದ್ದ ಔಷಧಿಗೆ ಕಲ್ಲು ಹಾಕುತ್ತಿದೆ ಎಂದು ಕಿಡಿಕಾರಿದರು.
ಈ ಸಂದರ್ಭದಲ್ಲಿ ಕಾಡುಗೊಲ್ಲ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಚಂಗಾವರ ಮಾರಣ್ಣ, ತುಮುಲ್ ನಿರ್ದೇಶಕ ಎಸ್.ಆರ್.ಗೌಡ, ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷೆ ಉಮಾ ವಿಜಯರಾಜು, ಬಿಜೆಪಿ ಮತ್ತು ಜೆಡಿಎಸ್ನ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.