GUBBI : ಸರ್ಕಾರಿ ಶಾಲೆಯಲ್ಲಿ ಓದಿದ ಮಕ್ಕಳು ಇಂದು ಮಹತ್ತರ ಸಾಧನೆ ಮಾಡಿದ್ದಾರೆ ಹಾಗೂ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ. ನಾನು ಸರ್ಕಾರಿ ಶಾಲೆಯಲ್ಲೇ ಓದಿತ್ತು. ಯಾವುದೇ ಕಾರಣಕ್ಕೂ ಸರ್ಕಾರಿ ಶಾಲೆ ಅಂತ ಮಕ್ಕಳಾಗಲಿ, ಪೋಷಕರಾಗಲಿ ಕೀಳರಿಮೆ ಬೆಳೆಸಿಕೊಳ್ಳಬೇಡಿ ಎಂದು ತುರುವೇಕೆರೆ ಕ್ಷೇತ್ರದ ಮಾಜಿ ಶಾಸಕ ಮಸಾಲ ಜಯರಾಮ್ ಗುಬ್ಬಿಯಲ್ಲಿ ತಿಳಿಸಿದ್ದಾರೆ.
ತಾಲೂಕಿನ ಸಿ.ಎಸ್.ಪುರ ಹೋಬಳಿಯ ಚಿಕ್ಕಚೆಂಗಾವಿ ಗ್ರಾಮದಲ್ಲಿ ರೈತ ಸಿ.ಕೆ ಪ್ರಕಾಶ್ ನಿರ್ಮಿಸಿ ಕೊಟ್ಟಿರುವ ನೂತನ ಸರ್ಕಾರಿ ಶಾಲೆಯ ಕಟ್ಟಡ ಉದ್ಘಾಟಿಸಿ ಮಾತನಾಡಿದರು. ಪೋಷಕರು ಆಂಗ್ಲ ಮಾಧ್ಯಮ ಶಾಲೆಗಳಿಗೆ ಮಾರುಹೋಗದೆ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕು. ಆ ಮೂಲಕ ಶಾಲೆಗಳನ್ನು ಉಳಿಸುವ ಕೆಲಸ ಮಾಡಬೇಕು. ನಾನು ಕೂಡ ಸರ್ಕಾರಿ ಶಾಲೆಯಲ್ಲಿಯೇ ವ್ಯಾಸಂಗ ಮಾಡಿದ್ದು, ಇಂದು ಒಂದು ಸಾವಿರ ಜನರಿಗೆ ಉದ್ಯೋಗವನ್ನು ನೀಡಿದ್ದೇನೆ. ಗ್ರಾಮೀಣ ಸರ್ಕಾರಿ ಶಾಲೆಯನ್ನು ಉಳಿಸುವ ನಿಟ್ಟಿನಲ್ಲಿ ರೈತ ಸಿ.ಕೆ ಪ್ರಕಾಶ್ ಅವರು ಶಾಲೆಯನ್ನು ಕಟ್ಟಿಸಿ ಕೊಟ್ಟಿದ್ದಾರೆ. ವಿದ್ಯಾರ್ಥಿಗಳ ದಾಖಲಾತಿಯು ಹೆಚ್ಚಾಗಿದೆ. ಇಂತಹ ಮಹತ್ತರ ಕಾರ್ಯದಲ್ಲಿ ಪ್ರತಿಯೊಬ್ಬರು ಭಾಗಿಯಾಗಬೇಕು. ಇನ್ನೂ ನಾನು ಕೂಡ ಈ ಶಾಲೆಗೆ ಅಕ್ಷರ ದಾಸೋಹ ಕಟ್ಟಡವನ್ನು ನಿರ್ಮಿಸಿ ಕೊಡುತ್ತೇನೆ ಎಂದು ಭರವಸೆ ನೀಡಿದರು.
ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿದ್ದಗಂಗಾ ಮಠದ ಶ್ರೀ ಸಿದ್ಧಲಿಂಗ ಮಹಾ ಸ್ವಾಮಿಗಳು ಭಾಗವಹಿಸಿದ್ದರು. ನಂತರ ಶಾಲಾ ಆವರಣದಲ್ಲಿ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ,ಎ ಗೋವಿಂದರಾಜು, ಬಿಇಓ ನಟರಾಜ್, ಎಚ್ ಲೇಪಾಕ್ಷಪ್ಪ , ವೆಂಕಟೇಗೌಡ, ಸಿ ಕೆ ಪ್ರಕಾಶ್, ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮೀನಾಕ್ಷಿ ಗೋವಿಂದರಾಜು, ಹನುಮಂತರಾಯಪ್ಪ, ಜಗದೀಶ್, ಅಶ್ವತ್ತೆಗೌಡ, ವೇದಾವತಿ ಹಾಗೂ ಶಿಕ್ಷಕರು ವಿದ್ಯಾರ್ಥಿಗಳು ಗ್ರಾಮಸ್ಥರು ಹಾಜರಿದ್ದರು.