CHIKKAMAGALURU NEWS : ಮಲೆನಾಡಿನಲ್ಲಿ ಮಳೆ ಮತ್ತು ಗಾಳಿ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಂಡಿದ್ದು, ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ನೆಮ್ಮಾರು [Nemmaru] ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಭಾರೀ ಗುಡ್ಡ ಕುಸಿತ ಸಂಭವಿಸಿದೆ. ಪರಿಣಾಮವಾಗಿ ಶೃಂಗೇರಿ–ಮಂಗಳೂರು ನಡುವಿನ ರಸ್ತೆ ಸಂಪರ್ಕ ಸಂಪೂರ್ಣ ಸ್ಥಗಿತಗೊಂಡಿದೆ.
ನೆನ್ನೆ ರಾತ್ರಿ ಇಡೀ ಧಾರಾಕಾರ ಮಳೆಯಾಗಿದ್ದರಿಂದ ಭೂಮಿಯ ತೇವಾಂಶ ಹೆಚ್ಚಾಗಿ, ಗುಡ್ಡ ಕುಸಿತ ಉಂಟಾಗಿದೆ. ಗುಡ್ಡದ ಮೇಲಿನಿಂದ ಬಂದ ಮಣ್ಣು ಹಾಗೂ ಬಂಡೆಗಳು ರಸ್ತೆ ಮೇಲೆ ಉರುಳಿದ್ದು, ಕಬ್ಬಿಣದ ತಡೆಗೋಡೆಗಳು ಕೂಡ ಕುಸಿದು ಬಿದ್ದಿವೆ. ಈ ನಡುವೆ ವಿದ್ಯುತ್ ಕಂಬಗಳು ಮುರಿದು ಬಿದ್ದ ಪರಿಣಾಮ ಹಲವೆಡೆ ವಿದ್ಯುತ್ ವ್ಯತ್ಯಯವೂ ಉಂಟಾಗಿದೆ.
ಇನ್ನು ಸ್ಥಳಕ್ಕೆ ಪೊಲೀಸರು, ಪಂಚಾಯಿತಿ ಸಿಬ್ಬಂದಿ ಹಾಗೂ ಸ್ಥಳೀಯರು ಧಾವಿಸಿ, ಸುರಿಯುತ್ತಿರುವ ಮಳೆಯ ಮಧ್ಯೆಯೇ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇನ್ನೂ ಮಳೆ ಮುಂದುವರಿದರೆ ಮತ್ತಷ್ಟು ಭೂಕುಸಿತ ಸಂಭವಿಸುವ ಅಪಾಯವಿದ್ದು, ಅಧಿಕಾರಿಗಳು ಜನತೆಗೆ ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದಾರೆ.
ಈ ನಡುವೆ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಕೂಡ ಸಣ್ಣ ಪ್ರಮಾಣದ ಭೂಕುಸಿತಗಳು ಸಂಭವಿಸಿದ್ದು, ಮಲೆನಾಡಿನ ಅನೇಕ ಭಾಗಗಳಲ್ಲಿ ನಿರಂತರ ಮಳೆಯಿಂದ ಅವಾಂತರದ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಶೃಂಗೇರಿ–ಮಂಗಳೂರು ನಡುವೆ ಸಂಚರಿಸುವ ವಾಹನ ಚಾಲಕರು ಬದಲಿ ಮಾರ್ಗಗಳನ್ನು ಬಳಸಬೇಕೆಂದು ಅಧಿಕಾರಿಗಳು ಸೂಚಿಸಿದ್ದಾರೆ.