KARNATAKA RAIN : ರಾಜ್ಯಾದ್ಯಂತ ವರುಣನ ಆರ್ಭಟ ಮುಂದುವರಿದಿದ್ದು, ಕರಾವಳಿ, ಮಲೆನಾಡು ಹಾಗೂ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ. ನಿರಂತರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ನದಿಗಳು ತುಂಬಿ ಹರಿಯುತ್ತಿವೆ. ನದಿ ತೀರದ ನಿವಾಸಿಗಳಿಗೆ ಪ್ರವಾಹದ ಆತಂಕ ಎದುರಾಗಿದೆ.
* ಕೊಡಗು ಜಿಲ್ಲೆಯಲ್ಲಿ 2 ದಿನಗಳ ರಜೆ
ಕೊಡಗಿನಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ, ಮೇ 26 ಮತ್ತು 27 ರಂದು ಕೊಡಗು ವಿಶ್ವವಿದ್ಯಾಲಯ ವ್ಯಾಪ್ತಿಗೆ ಒಳಪಡುವ ಎಲ್ಲಾ ಕಾಲೇಜುಗಳಿಗೆ ಹಾಗೂ ಅಂಗನವಾಡಿಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಮಳೆಯಿಂದಾಗಿ ಜಿಲ್ಲೆಯ ಹಲವೆಡೆ ಸಂಚಾರ ಮತ್ತು ದಿನಚರಿ ಕಾರ್ಯಗಳಲ್ಲಿ ಅಡ್ಡಿಪಡವಾಗಿದೆ.
* ಮೈಸೂರಿನಲ್ಲಿ ಅಂಗನವಾಡಿಗಳಿಗೆ ರಜೆ
ಮೈಸೂರಿನಲ್ಲೂ ಬಿರುಗಾಳಿಯೊಂದಿಗೆ ಭಾರೀ ಮಳೆಯಾಗಿದೆ. ಜನಜೀವನ ಅಸ್ತವ್ಯಸ್ತವಾಗಿದ್ದು, ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಆದೇಶ ಹೊರಡಿಸಿದ್ದಾರೆ.
* ಶಾಲೆ ಆರಂಭಕ್ಕೆ ವಿಳಂಬ
ಬೇಸಿಗೆ ರಜೆಯ ಬಳಿಕ ಪುನರಾರಂಭವಾಗಬೇಕಿದ್ದ ಶಾಲೆಗಳ ಆರಂಭವನ್ನು ಮಳೆಯ ಕಾರಣದಿಂದ ಮುಂದೂಡಲಾಗಿದೆ. ನಿರಂತರ ಮಳೆಯ ಪರಿಣಾಮವಾಗಿ ಹಲವೆಡೆ ಶಾಲೆಗಳು ಮುಚ್ಚಲ್ಪಟ್ಟಿವೆ.
* ಚಿಕ್ಕಮಗಳೂರಿನಲ್ಲಿ 3 ದಿನಗಳ ರಜೆ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಫಿನಾಡಿನ ಮಳೆ ಅಬ್ಬರ ಮುಂದುವರಿದಿದ್ದು, ಮೇ 28ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ ಹಾಗೂ ನರಸಿಂಹರಾಜಪುರದ ಅಂಗನವಾಡಿಗಳಿಗೆ 3 ದಿನಗಳ ಕಾಲ (ಮೇ 26 ರಿಂದ 28ರವರೆಗೆ) ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
* ಹಾಸನ ಜಿಲ್ಲೆಯಲ್ಲೂ ಮಳೆಯ ಅಬ್ಬರ
ಹಾಸನ ಜಿಲ್ಲೆಯ ಮಲೆನಾಡು ಪ್ರದೇಶದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಗುಡ್ಡ ಕುಸಿಯುವ ಆತಂಕ ಹೆಚ್ಚಾಗಿದೆ. ಸಕಲೇಶಪುರ-ಮಾರನಹಳ್ಳಿ ಮಾರ್ಗದಲ್ಲಿ ಮಣ್ಣು ಕುಸಿಯುವ ಭೀತಿಯಿದೆ. ಆದರೂ ಪ್ರಸ್ತುತ ವಾಹನ ಸಂಚಾರಕ್ಕೆ ಯಾವುದೇ ಅಡ್ಡಿಯಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.