Assam : ದೇವಾಲಯಗಳ ನಾಡು ಅಸ್ಸಾಂ ಭಾರೀ ಮಳೆಗೆ ಅಕ್ಷರಶಃ ಮುಳುಗಿ ಹೋಗಿದೆ. ಮಳೆಯ ಅವಾಂತರದಿಂದಾಗಿ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದುವರೆವಿಗೂ ಒಂದು ಅಂದಾಜಿನ ಪ್ರಕಾರ ಸುಮಾರು 20 ಜನ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಇತ್ತ ಅಸ್ಸಾಂನ 20 ಜಿಲ್ಲೆಗಳಲ್ಲಿ ಸುಮಾರು 4 ಲಕ್ಷ ಮಂದಿ ನಿರಾಶ್ರಿತರಾಗಿದ್ದು, 7 ನದಿಗಳು ಉಕ್ಕಿಹರಿಯುತ್ತಿವೆ ಎನ್ನಲಾಗಿದೆ.
ನಿರಂತರ ಮಳೆಯಾಗುತ್ತಿರುವುದರಿಂದ ತಗ್ಗು ಪ್ರದೇಶ ಮತ್ತು ನದಿ ದಂಡೆ ಪ್ರದೇಶಗಳಲ್ಲಿ ಪ್ರವಾಹ ನಿರ್ಮಾಣವಾಗಿದ್ದು, ಈ ಪ್ರದೇಶದಲ್ಲಿ ವಾಸಿಸುವ ಜನರು ಸಂಕಷ್ಟಕ್ಕೆ ಒಳಗಾಗುವ ಸಾಧ್ಯತೆ ಇದೆ. ಸ್ವತಃ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ರಾಜ್ಯದ ಸ್ಥಿತಿಗತಿ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಿಎಂ ಶರ್ಮಾ ಅವರಿಗೆ ಕರೆ ಮಾಡಿ, ಪರಿಸ್ಥಿತಿ ಮಾಹಿತಿ ಪಡೆದಿದ್ದಾರೆ. ಅಗತ್ಯವಿರುವ ಎಲ್ಲಾ ಸಹಾಯ ನೀಡುವ ಭರವಸೆ ನೀಡಲಾಗಿದೆ. ಇನ್ನು ಸಂತ್ರಸ್ತರ ರಕ್ಷಣೆಗೆ ಹಲವಾರು ಸಂಸ್ಥೆಗಳು ರಕ್ಷಣಾ ಮತ್ತು ಪರಿಹಾರ ಕಾರ್ಯಚರಣೆಗಳಲ್ಲಿ ನಿರತವಾಗಿವೆ. ಅಸ್ಸಾಂ-ಅರುಣಾಚಲ ಪ್ರದೇಶ ಗಡಿಯಲ್ಲಿ ಸಿಲುಕಿದ 14 ಮಂದಿಯನ್ನು ಐಎಎಫ್ ಹೆಲಿಕಾಪ್ಟರ್ ಮೂಲಕ ರಕ್ಷಣೆ ಮಾಡಲಾಗಿದೆ ಎನ್ನಲಾಗಿದೆ.
ಗುವಾಹಟಿಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವನ್ನಪ್ಪಿದ 5 ಜನರ ಕುಟುಂಬಗಳಿಗೆ ಸರ್ಕಾರ ತಲಾ 4 ಲಕ್ಷ ರೂ. ಪರಿಹಾರ ಘೋಷಿಸಿದೆ. ಕ್ಯಾಚರ್ ಮತ್ತು ಶ್ರೀಭೂಮಿ ಜಿಲ್ಲೆಗಳಲ್ಲಿ ತಲಾ ಒಂದು ಸಾವು ಸಂಭವಿಸಿದೆ ಎನ್ನಲಾಗಿದೆ. ರಾಜ್ಯದಲ್ಲಿ ಪ್ರವಾಹ ಮತ್ತು ಭೂಕುಸಿತದಿಂದ ಸಾವನ್ನಪ್ಪಿದವರ ಸಂಖ್ಯೆ 10ಕ್ಕೆ ಏರಿದ್ದು, 19 ಜಿಲ್ಲೆಗಳ 3,64,046 ಜನರು ಪ್ರವಾಹದಲ್ಲಿ ಸಿಲುಕಿದ್ದಾರೆ. ಕ್ಯಾಚರ್ನಲ್ಲಿ 1,03,790 ಜನರು ಪ್ರವಾಹಕ್ಕೆ ತುತ್ತಾಗಿದ್ದಾರೆ. ಶ್ರೀಭೂಮಿಯಲ್ಲಿ 83,621 ಜನರು ಮತ್ತು ನಾಗಾಂವ್ನಲ್ಲಿ 62,700 ಜನರು ಸಂಕಷ್ಟದಲ್ಲಿದ್ದಾರೆ ಎನ್ನಲಾಗಿದೆ.