ರಾಜ್ಯ : ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಆರಂಭವಾಗಿದ್ದು, ಜನಜೀವನ ಮೇಲೆ ಪರಿಣಾಮ ಬೀರುತ್ತಿದೆ. ಈ ಬಾರಿ ನಿರೀಕ್ಷೆಗಿಂತ ಮುಂಚೆಯೇ ಮುಂಗಾರು ರಾಜ್ಯದ ವಿವಿಧ ಭಾಗಗಳಿಗೆ ಪ್ರವೇಶಿಸಿ, ರೈತರ ಮುಖದಲ್ಲಿ ಸಂತಸ ಮೂಡಿಸಿದ್ದು, ಇತರೆ ಭಾಗಗಳಲ್ಲಿ ಆತಂಕವೂಂಟು ಮಾಡಿದೆ.
ಇನ್ನು ಮೇ ತಿಂಗಳ ಕೊನೆ ಹಾಗೂ ಜೂನ್ ಮೊದಲ ವಾರದಲ್ಲಿ ಮುಂಗಾರು ಮಳೆ ತೀವ್ರತೆ ಪಡೆಯಲಿದೆ. ಈಗಾಗಲೇ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
*ರೆಡ್ ಅಲರ್ಟ್: ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ
*ಆರೆಂಜ್ ಅಲರ್ಟ್: ಬೆಳಗಾವಿ, ಕಲಬುರಗಿ, ವಿಜಯಪುರ, ಬೀದರ್
*ಯೆಲ್ಲೋ ಅಲರ್ಟ್: ಬಾಗಲಕೋಟೆ, ಯಾದಗಿರಿ, ಹಾವೇರಿ, ಗದಗ, ಹಾಸನ
ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಉಲ್ಲಾಳದ ಬಳಿ ಭೂಕುಸಿತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ಒಂದೇ ದಿನ ನಾಲ್ವರು ವ್ಯಕ್ತಿಗಳು ಮೃತಪಟ್ಟು ಕುಟುಂಬಗಳಿಗೆ ಆಘಾತ ಉಂಟಾಗಿದೆ. ಗುಡ್ಡ ಪ್ರದೇಶಗಳಲ್ಲಿ ಕುಸಿತ ಸಂಭವಿಸುವ ಸಾಧ್ಯತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಜನರು ಎಚ್ಚರದಿಂದಿರಬೇಕೆಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಜೊತೆಗೆ ಗುಡುಗು, ಜೋರಾದ ಗಾಳಿಯೂ ಬೀಸಲಿದೆ. ಮೀನುಗಾರರಿಗೆ ಸಮುದ್ರ ಪ್ರವೇಶದ ಮೇಲೆ ನಿಷೇಧವಿದೆ. ಮುಂಜಾಗ್ರತೆಯಿಂದ ವರ್ತಿಸುವಂತೆ ಮನವಿ ಮಾಡಲಾಗಿದೆ.
ಬೆಂಗಳೂರು ನಗರದಲ್ಲಿ ಇಂದು ಮೋಡಕವಿದ ವಾತಾವರಣ ಮುಂದುವರೆಯಲಿದೆ. ಸಂಜೆ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಸಂಚಾರದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.