BANGALORE: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ವಿಜಯೋತ್ಸವ ವೇಳೆ ಸಂಭವಿಸಿದ ಭೀಕರ ಕಾಲ್ತುಳಿತ ಘಟನೆಯ ನಂತರ ಗೃಹಸಚಿವ ಡಾ. ಜಿ. ಪರಮೇಶ್ವರ್ ಅವರು ಇಂದು ಚಿನ್ನಸ್ವಾಮಿ ಸ್ಟೇಡಿಯಂಗೆ ಪೊಲೀಸರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ಈ ವೇಳೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್, ಹೆಚ್ಚುವರಿ ಆಯುಕ್ತ ರಮೇಶ್ ಬಾನೋತ್ ಹಾಗೂ ಡಿಸಿಪಿಗಳಿಂದ ಘಟನೆಯ ಬಗ್ಗೆ ಮಾಹಿತಿ ಪಡೆದ ಸಚಿವರು, ನಂತರ ಕೆಎಸ್ಸಿಎ, ಆರ್ಸಿಬಿ ಮತ್ತು ನಗರ ಪೊಲೀಸ್ ಇಲಾಖೆ ಅಧಿಕಾರಿಗಳೊಂದಿಗೆ ಸುದೀರ್ಘ ಸಭೆ ನಡೆಸಿದ್ದಾರೆ.
ಇನ್ನು ಮಾಧ್ಯಮದೊಂದಿಗೆ ಮಾತನಾಡಿದ ಗೃಹಸಚಿವರು, "ಮುಖ್ಯಮಂತ್ರಿಗಳ ಆದೇಶದಂತೆ ಮ್ಯಾಜಿಸ್ಟ್ರೀಯಲ್ ವಿಚಾರಣೆಗೆ ಆದೇಶಿಸಿದ್ದು, ಅದರ ಪ್ರಕ್ರಿಯೆ ಆರಂಭವಾಗಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಯಾವ ಸ್ಥಳದಲ್ಲಿ ನಾನು ಖುದ್ದಾಗಿ ಕಾಲ್ತುಳಿತ ಸಂಭವಿಸಿದ ಸ್ಥಳಗಳನ್ನು ಪರಿಶೀಲಿಸಿದ್ದೇನೆ. ಗೇಟ್ ನಂಬರ್ 6, 7, 2, ಮತ್ತು 2ಎ, 17, 18, 21, 16 ಇಷ್ಟು ಗೇಟ್ ಗಳಲ್ಲಿ ಕಾಲ್ತುಳಿತ ಸಂಭವಿಸಿದ್ದು, ಘಟನಾ ಸ್ಥಳದಲ್ಲೇ ಯಾರೂ ಸಾವನ್ನಪ್ಪಿರುವ ಬಗ್ಗೆ ಮಾಹಿತಿ ಇಲ್ಲ, ಆಸ್ಪತ್ರೆಗೆ ಕರೆದೊಯ್ಯುವಾಗ, ಹಾಗೂ ಚಿಕಿತ್ಸೆ ವೇಳೆ ಕೆಲವು ಮಂದಿ ಮೃತಪಟ್ಟಿದ್ದಾರೆ. ಹೀಗಾಗಿ ಯಾವ ಗೇಟ್ನಲ್ಲಿ ಎಷ್ಟು ಜನ ಮೃತರಾದರು ಎಂಬ ನಿಖರ ಮಾಹಿತಿ ಇಲ್ಲ," ಎಂದು ತಿಳಿಸಿದರು.
ಇನ್ನು "ವಿಧಾನಸೌಧದ ಬಳಿ 1 ಲಕ್ಷ ಜನ ಸೇರುತ್ತಾರೆ ಎಂದು ಅಂದಾಜಿಸಲಾಗಿತ್ತು, ಸ್ಟೇಡಿಯಂ ಒಳಗೆ 40 ಸಾವಿರ ಜನರು, ಹೊರಗಡೆ ಸುಮಾರು 2.5 ಲಕ್ಷ ಜನರು ಸೇರಿದ್ದರು ಎಂಬುದಾಗಿ ಅಂದಾಜಿಸಲಾಗಿದೆ. ಮೆಟ್ರೋ ಪ್ರಾಧಿಕಾರದ ಪ್ರಕಾರ 8.7 ಲಕ್ಷ ಜನ ಪ್ರಯಾಣಿಸಿದ್ದಾರೆ. ಇಷ್ಟೊಂದು ಜನ ಒಂದೇ ಕಡೆ ಸೇರಿದ್ದರ ಉದಾಹರಣೆಗಳೇ ಇಲ್ಲ, ಆದರೆ ದುರದೃಷ್ಟವಶಾತ್ ಈ ದುರಂತ ನಡೆದಿದೆ” ಎಂದು ಸಚಿವರು ಬೇಸರ ವ್ಯಕ್ತಪಡಿಸಿದರು