ಹಾಸನ : ಹಾಸನ ಜಿಲ್ಲೆಯಲ್ಲಿ ಮಳೆ ಮುಂದುವರಿದಿದೆ. ಮಲೆನಾಡು ಭಾಗದಲ್ಲಿ ಹರಿದ ಮಳೆ ಹಿನ್ನಲೆಯಲ್ಲಿ ಹೇಮಾವತಿ ಜಲಾಶಯದ ಒಳಹರಿವಿನಲ್ಲಿ ಗಣನೀಯ ಏರಿಕೆಯಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರ, ಆಲೂರು ಭಾಗಗಳಲ್ಲಿ ಮುಂದುವರಿದ ಮಳೆಯ ಪರಿಣಾಮ, ಗೊರೂರಿನ ಹೇಮಾವತಿ ಜಲಾಶಯಕ್ಕೆ ನೀರಿನ ಹರಿವು ಹೆಚ್ಚಾಗಿದೆ.
ಜಲಾಶಯಕ್ಕೆ ಪ್ರಸ್ತುತ 7,992 ಕ್ಯೂಸೆಕ್ ನೀರು ಹರಿದುಬರುತ್ತಿದ್ದು, ನದಿಯಿಂದ 3,875 ಕ್ಯೂಸೆಕ್ ನೀರು ಹೊರಹರಿಯುತ್ತಿದೆ. ಹೇಮಾವತಿ ಜಲಾಶಯದ ಗರಿಷ್ಠ ಮಟ್ಟ 2922.00 ಅಡಿಗಳಾಗಿದ್ದು, ಈ ಹೊತ್ತಿಗೆ ಜಲಮಟ್ಟ 2905.85 ಅಡಿಗಳಿಗೆ ಏರಿಕೆಯಾಗಿದೆ.ಒಟ್ಟು 37.103 ಟಿಎಂಸಿ ಸಂಗ್ರಹ ಸಾಮರ್ಥ್ಯವಿರುವ ಈ ಜಲಾಶಯದಲ್ಲಿ ಈಗ 23.661 ಟಿಎಂಸಿ ನೀರು ಸಂಗ್ರಹವಾಗಿದೆ.
ಹಾಸನ, ಬೇಲೂರು, ಅರಕಲಗೂಡು ತಾಲೂಕುಗಳಲ್ಲಿ ಮಂಧ್ಯಂತರ ಮಳೆ ಕಂಡುಬರುತ್ತಿದ್ದು, ಬಹುತೇಕ ಕಡೆಗಳಲ್ಲಿ ಮೋಡ ಕವಿದ ವಾತಾವರಣವಿದೆ. ಮಳೆ ಇನ್ನೂ ಮುಂದುವರಿಯುವ ಸಾಧ್ಯತೆಯಿರುವ ಹಿನ್ನೆಲೆ, ಜಿಲ್ಲೆಯ ನದಿಗಳ ಪ್ರವಾಹ ಪರಿಸ್ಥಿತಿಗೂ ಅಧಿಕಾರಿಗಳು ನಿಗಾ ಇಟ್ಟಿದ್ದಾರೆ.