ಬೆಂಗಳೂರು : ಒಬುಳಾಪುರಂ ಮೈನಿಂಗ್ ಕಂಪನಿ (ಒಎಂಸಿ) ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮಾಜಿ ಸಚಿವ ಹಾಗೂ ಶಾಸಕ ಗಾಲಿ ಜನಾರ್ದನ್ ರೆಡ್ಡಿಯನ್ನು ಇಂದು ಚಂಚಲಗೂಡ ಜೈಲಿನಿಂದ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರ ಮಾಡುವಂತೆ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ರೆಡ್ಡಿ ಮೇಲಿದ್ದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಸಿಬಿಐ ನ್ಯಾಯಾಲಯ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಶಿಕ್ಷೆ ವಿಧಿಸಿದ ನಂತರ ಪೊಲೀಸರು ರೆಡ್ಡಿಯನ್ನು ಬಂಧಿಸಿ ಚಂಚಲಗೂಡ ಜೈಲಿಗೆ ಶಿಫ್ಟ್ ಮಾಡಿದ್ದರು. ಈ ಮೂಲಕ 10 ವರ್ಷಗಳ ಬಳಿಕ ಮತ್ತೆ ಜನಾರ್ದನ ರೆಡ್ಡಿ ಜೈಲುಪಾಲಾಗಿದ್ದಾರೆ
ಇಂದು ಹೈದರಾಬಾದ್ ಪೊಲೀಸರ ನೇತೃತ್ವದಲ್ಲಿ ಜನಾರ್ದನ್ ರೆಡ್ಡಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬಾಡಿ ವಾರಂಟ್ ಮೇರೆಗೆ ಹಾಜರುಪಡಿಸಲಾಯಿತು. ನ್ಯಾಯಮೂರ್ತಿ ಸಂತೋಷ್ ಗಜಾನನ್ ಭಟ್ ಅವರ ನೇತೃತ್ವದಲ್ಲಿ ವಿಚಾರಣೆ ನಡೆದಿದ್ದು, ರೆಡ್ಡಿಯನ್ನು ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಿಸುವಂತೆ ಆದೇಶ ಹೊರಡಿಸಿದ್ದು, ಪ್ರಕರಣದ ಮುಂದಿನ ವಿಚಾರಣೆಯು ಜೂನ್ 2ಕ್ಕೆ ಮುಂದೂಡಲಾಗಿದೆ.