ತಿಪಟೂರು:
ಅರಣ್ಯ ಇಲಾಖೆಯ ಯಡವಟ್ಟಿನಿಂದಾಗಿ ಚಿರತೆಯೊಂದು ಬಲಿಯಾಗಿರೋ ಘಟನೆ ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಹೋಬಳಿ ಮುದ್ಲೇಹಳ್ಳಿ ಗ್ರಾಮದಲ್ಲಿ ನಡೆದಿದೆ. ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ವ್ಯಾಪ್ತಿಯಲ್ಲಿ ಇತ್ತೀಚಿನ ದಿನಗಳಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು, ಚಿರತೆಗಳನ್ನು ಸೆರೆ ಹಿಡಿಯುವಂತೆ ಸ್ಥಳೀಯ ಜನರು ಅರಣ್ಯ ಇಲಾಖೆಗೆ ಮನವಿ ಮಾಡಿಕೊಂಡಿದ್ದರು. ಹೀಗಾಗಿ ಮದ್ಲೇಹಳ್ಳಿ ಗ್ರಾಮದ ನಾರಾಯಣಪ್ಪ ಎಂಬುವವರ ಜಮೀನಿನಲ್ಲಿ ಚಿರತೆ ಸೆರೆಗೆ ಬೋನನ್ನು ಇರಿಸಲಾಗಿತ್ತು. ಬೋನಿಗೆ ಚಿರತೆ ಸೆರೆ ಏನೋ ಆಗಿತ್ತು. ಆದರೆ ಆ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿದ್ದು ಬೋನಿನಲ್ಲಿದ್ದ ಚಿರತೆ ಬೆಂಕಿಗೆ ಆಹುತಿಯಾಗಿದೆ.
ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಚಿರತೆ ಬೋನಿನಿಂದ ಹೊರ ಬರಲು ಪ್ರಯತ್ನಿಸಿದೆ. ಆದರೆ ಚಿರತೆ ಹೊರಬರಲಾಗದೇ ಬೆಂಕಿಯ ಕೆನ್ನಾಲಗೆಗೆ ಸುಟ್ಟ ಗಾಯಗಳಿಂದ ಸಾವನ್ನಪ್ಪಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅರಣ್ಯ ಇಲಾಖೆ ಚಿರತೆ ಸೆರೆಗೆ ಬೋನ್ ಇಟ್ಟಿದೆ ಆದರೆ ಬೋನಿನಲ್ಲಿ ಚಿರತೆ ಬಿದ್ದಿರುವ ಬಗ್ಗೆ ಮಾಹಿತಿ ಕಲೆಹಾಕುವಲ್ಲಿ ವಿಫಲವಾಗಿದ್ದರಿಂದ ಚಿರತೆ ಸಾವನ್ನಪ್ಪಿದೆ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದರು.