ಬೆಳಗಾವಿ : ಲೋಕಾಯುಕ್ತ ಇಲಾಖೆ ಇಂದು ಬೆಳಗಾವಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಮೂರು ಪ್ರಭಾವಿ ಅಧಿಕಾರಿಗಳ ಮನೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ಭಾರಿ ಪ್ರಮಾಣದ ದಾಖಲೆ ಪರಿಶೀಲನೆ ನಡೆಸಿದೆ.
ಲೋಕಾಯುಕ್ತ ಎಸ್ಪಿ ಹನುಮಂತರಾಯ ಅವರ ನೇತೃತ್ವದಲ್ಲಿ ನಡೆದ ಈ ದಾಳಿಯಲ್ಲಿ, ಮೊದಲಾಗಿ ದೇವರಾಜ್ ಅರಸು ಅಭಿವೃದ್ದಿ ನಿಗಮದ ವ್ಯವಸ್ಥಾಪಕ ಸಿದ್ದಲಿಂಗಪ್ಪ ಬಾನಸಿ ಅವರಿಗೆ ಸೇರಿದ ಬೆಳಗಾವಿಯ ವಿದ್ಯಾನಗರದಲ್ಲಿನ ನಿವಾಸ, ರಾಯಬಾಗ ತಾಲ್ಲೂಕಿನ ಬೆಕ್ಕೇರಿ ಗ್ರಾಮದಲ್ಲಿನ ಮನೆ ಹಾಗೂ ಕಚೇರಿಗಳಲ್ಲಿ ದಾಳಿ ನಡೆಯಿತು.
ಇನ್ನೊಂದೆಡೆ, ಧಾರವಾಡ ಲೋಕೋಪಯೋಗಿ ಇಲಾಖೆ ಮುಖ್ಯ ಎಂಜಿನಿಯರ್ ಎಚ್.ಸಿ. ಸುರೇಶ್ ಅವರ ಬೆಳಗಾವಿಯ ಹನುಮಾನ್ ನಗರದ ನಿವಾಸದ ಮೇಲೂ ದಾಳಿ ನಡೆದಿದೆ. ಇದೇ ಸಂದರ್ಭದಲ್ಲಿ, ಗದಗ ನಿರ್ಮಿತ ಕೇಂದ್ರದ ಯೋಜನಾ ನಿರ್ದೇಶಕ ಗಂಗಾಧರ ಶಿರೋಳ ಅವರ ಹನುಮಾನ್ ನಗರದ ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಹಠಾತ್ ದಾಳಿ ನಡೆಸಿದ್ದಾರೆ.
ಅಧಿಕಾರಿಗಳು ಈ ಎಲ್ಲಾ ಮನೆಗಳು ಮತ್ತು ಕಚೇರಿಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದು, ಭ್ರಷ್ಟಾಚಾರ ಸಂಬಂಧ ತನಿಖೆ ಮುಂದುವರೆದಿದೆ. ಶೀಘ್ರದಲ್ಲೇ ತನಿಖಾ ವರದಿ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.