ಮಧುಗಿರಿ:
ಮಧುಗಿರಿ ಪಟ್ಟಣದ ಕೆ.ಆರ್ ಬಡಾವಣೆಯ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತ ಸಂಘಕ್ಕೆ ಚುನಾವಣೆ ನಡೆದಿದ್ದು, ನೂತನ ಅಧ್ಯಕ್ಷರಾಗಿ ಹನುಮಂತಪುರದ ಬೈರಪ್ಪ ಹಾಗೂ ಉಪಾಧ್ಯಕ್ಷರಾಗಿ ನಾಗಭೂಷಣ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. KMF ನಿರ್ದೇಶಕ ಮೈದನಹಳ್ಳಿ ಕಾಂತರಾಜು, ತುಮುಲ್ ನಿರ್ದೇಶಕ ಬಿ.ಎನ್.ನಾಗೇಶ್ ಬಾಬು, DCC ಬ್ಯಾಂಕ್ ನಿರ್ದೇಶಕ ಮೂರ್ತಿ, ಪುರಸಭಾ ಮಾಜಿ ಅಧ್ಯಕ್ಷ ಎಂ.ಕೆ.ನಂಜುಂಡರಾಜು ಸೇರಿ ಹಲವಾರು ಮಂದಿ ಭಾಗಿಯಾಗಿದ್ದರು. ಇನ್ನು ನೂತನವಾಗಿ ಆಯ್ಕೆಯಾದ ಅಧ್ಯಕ್ಷ, ಉಪಾಧ್ಯಕ್ಷರಿಗೆ ಹಾರ ಹಾಕಿ, ಸಿಹಿ ಹಂಚಿ ಸಂಭ್ರಮಿಸಿದರು.
ಈ ವೇಳೆ ಮಾತನಾಡಿದ ನೂತನ ಅಧ್ಯಕ್ಷ ಬೈರಪ್ಪ, ತಾಲೂಕಿನ ರೈತರ ಅನುಕೂಲಕ್ಕೆ ಸ್ವಂತ ಖರ್ಚಿನಲ್ಲಿ ಸುಸಜ್ಜಿತ ಕಟ್ಟಡವನ್ನು ನಿರ್ಮಿಸಲಾಗುವುದು ಎಂದು ಈ ಹಿಂದೆ ಭರವಸೆ ನೀಡಿದ್ದು, ಅದಕ್ಕೆ ಬದ್ಧನಿದ್ದೇನೆ ಎಂದು ತಿಳಿಸಿದರು. ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಅವರ ಸಹಕಾರದಿಂದ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರಚಿಸಲಾಗುವುದು ಎಂದು ತಿಳಿಸಿದರು.