ಕಾರವಾರ : ಕಾಲು ಜಾರಿ ಸೇತುವೆ ಮೇಲಿಂದ ಕಾಳಿ ನದಿಗೆ ಬಿದ್ದ ವ್ಯಕ್ತಿ ನಾಪತ್ತೆ

ಕಾರವಾರ : ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದ್ದು, ಹಲವು ಅನಾಹುತಗಳು ಸಂಭವಿಸುತ್ತಿವೆ. ಒಂದೆಡೆ ಮಳೆಯ ಅಬ್ಬರವಾದರೆ ಮತ್ತೊಂದೆಡೆ ಗುಡ್ಡ ಕುಸಿಯುವ ಭೀತಿ ಎದುರಾಗಿದೆ. ಈ ನಡುವೆ ವ್ಯಕ್ತಿಯೊಬ್ಬ ಕಾಲು ಜಾರಿ ಕಾಳಿ ನದಿಗೆ ಬಿದ್ದು ನಾಪತ್ತೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಸುಂಕೇರಿ ಗ್ರಾಮದಲ್ಲಿ ನಡೆದಿದೆ.

ನಾಪತ್ತೆಯಾಗಿರುವ ವ್ಯಕ್ತಿಯನ್ನು ಸಂತೋಷ್‌ ರಾಯ್ಕರ್‌ (35) ಎಂದು ಗುರುತಿಸಲಾಗಿದೆ. ರಾತ್ರಿ ಸುಂಕೇರಿ ಗ್ರಾಮದ ಸೇತುವೆ ಬಳಿ ಈ ದುರ್ಘಟನೆ ನಡೆದಿದೆ. ತೀವ್ರ ಮಳೆಯ ಕಾರಣದಿಂದ ನದಿ ತುಂಬಿ ಹರಿಯುತ್ತಿದ್ದು, ಸೇತುವೆಯ ಹತ್ತಿರ ನಡೆದುಕೊಂಡು ಹೋಗುತ್ತಿದ್ದ ಸಂತೋಷ್‌ ಆಕಸ್ಮಿಕವಾಗಿ ಕಾಲುಜಾರಿ ನದಿಗೆ ಬಿದ್ದಿದ್ದಾರೆ ಎನ್ನಲಾಗಿದೆ.

ಘಟನೆಯ ಬಳಿಕ ಸ್ಥಳೀಯರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯ ಆರಂಭಿಸಿದ್ದಾರೆ. ರಬ್ಬರ್ ಬೋಟ್‌ ನ ಸಹಾಯದಿಂದ ನದಿಯ ಹಿನ್ನೀರಿನಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ಈ ಘಟನೆಯ ಬಗ್ಗೆ ಕಾರವಾರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮಳೆ ಹಾಗೂ ನೆರೆ ಪ್ರಭಾವದಿಂದಾಗಿ ಇಂತಹ ಘಟನೆಗಳು ಹೆಚ್ಚಾಗುತ್ತಿರುವ ಕಾರಣ ಜನತೆ ಅಗತ್ಯ ಮುಂಜಾಗ್ರತೆ ವಹಿಸಿಕೊಳ್ಳುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

 

Author:

...
Keerthana J

Copy Editor

prajashakthi tv

share
No Reviews