ಚನ್ನಪಟ್ಟಣ :
ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿದರೆ, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚನ್ನಪಟ್ಟಣ ತಾಲೂಕಿನ ಅಮ್ಮಳ್ಳಿದೊಡ್ಡಿ ಗ್ರಾಮದ ಸಮೀಪದ ಚನ್ನಪಟ್ಟಣ ಕಬ್ಬಾಳು ರಸ್ತೆಯಲ್ಲಿ ನಡೆದಿದೆ. ಬೆಂಗಳೂರಿನ ಸುಮನಹಳ್ಳಿ ನಿವಾಸಿಗಳಾದ ಮಧು (32) ದೀಪು (22) ಮತ್ತು ಅಭಿ (21) ಎಂಬುವರು ಮೃತ ದುರ್ದೈವಿಗಳಾಗಿದ್ದಾರೆ.
ಸುಮನಹಳ್ಳಿ ನಿವಾಸಿಗಳಾದ ಇವರು ಒಂದೇ ಕಂಪನಿಯಲ್ಲಿ ಕೆಲಸ ಮಾಡ್ತಿದ್ದು, ಕಬ್ಬಾಳು ದೇವಸ್ಥಾನದಲ್ಲಿ ಸಂಬಂಧಿಕರೊಬ್ಬರ ಕಾರ್ಯಕ್ರಮಕ್ಕೆ ಆಗಮಿಸಿದ್ದರು, ಊಟ ಮುಗಿಸಿಕೊಂಡು ಬೆಂಗಳೂರಿಗೆ ತೆರಳಲು ಕಬ್ಬಾಳಿನಿಂದ ಚನ್ನಪಟ್ಟಣ ಕಡೆಗೆ ಬರುತ್ತಿರುವಾಗ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಇನ್ನು ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಮೂವರು ಸ್ಥಳದಲ್ಲೆ ಸಾವನ್ನಪ್ಪಿದರೆ. ಮತ್ತೋರ್ವನ ಸ್ಥಿತಿ ಚಿಂತಾಜನಕವಾಗಿದೆ, ಹಾಗೂ ಇನ್ನೋರ್ವನಿಗೆ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.
ಸದ್ಯ ಘಟನೆ ಸಂಬಂಧ ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.