TUMKUR : ತುಮಕೂರು ಜಿಲ್ಲೆಯ ಎಸ್ಪಿ ಕಚೇರಿ ಮುಂದೆ ಇಂದು ಹೇಮಾವತಿ ಎಕ್ಸಪ್ರೆಸ್ ಲಿಂಕ್ ಕೆನಾಲ್ ವಿರೋಧಿಸಿ ಹಾಗೂ ರೈತರ ರಾಜಕೀಯ ನಾಯಕರ ಹಾಗೂ ರೈತ ಮುಖಂಡರ ನೇತೃತ್ವದಲ್ಲಿ ಭಾರೀ ಪ್ರತಿಭಟನೆ ನಡೆಸಲಾಯಿತು. ಶಾಸಕ ಸುರೇಶ್ ಗೌಡ, ತುರುವೇಕೆರೆ ಶಾಸಕ ಎಂ.ಟಿ. ಕೃಷ್ಣಪ್ಪ, ಸೊಗಡು ಶಿವಣ್ಣ, ಬಿಜೆಪಿ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿ ಹಾಗೂ ಹಲವಾರು ಬಿಜೆಪಿ ಹಾಗೂ ರೈತ ಸಂಘಟನೆಗಳ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಪೊಲೀಸರ ವಿರುದ್ಧ ಧಿಕ್ಕಾರ ಘೋಷಣೆ ಕೂಗಿದ ಪ್ರತಿಭಟನಾಕಾರರು, ಎಸ್ಪಿ ಕಚೇರಿಯ ಮೆಟ್ಟಿಲುಗಳ ಮೇಲೆ ಧರಣಿ ಕುಳಿತು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪೊಲೀಸ್ ಇಲಾಖೆಯ ಕ್ರಮಗಳ ವಿರುದ್ಧ ಕಿಡಿಕಾರಿದರು ಮತ್ತು ಇತ್ತೀಚೆಗೆ ದಾಖಲಾಗಿರುವ ಎಫ್ಐಆರ್ ಅನ್ನು ತಕ್ಷಣ ವಾಪಸ್ ಪಡೆಯಬೇಕೆಂದು ಆಗ್ರಹಿಸಿದರು. ಅಲ್ಲದೇ ಅಕ್ರೋಶಗೊಂಡ ಶಾಸಕರು ನೇರವಾಗಿ ಎಸ್ಪಿ ಚೇಂಬರ್ಗೆ ತೆರಳಿ, ಎಫ್ಐಆರ್ ವಾಪಸ್ ಪಡೆಯುವಂತೆ ಎಸ್ಪಿಗೆ ಮನವಿ ಸಲ್ಲಿಸಿದರು. ಈ ವೇಳೆ ತುರುವೇಕೆರೆ ಶಾಸಕ ಎಂ.ಟಿ. ಕೃಷ್ಣಪ್ಪ ಅವರು ಎಸ್ಪಿಯೊಂದಿಗೆ ವಿಸ್ತೃತ ಚರ್ಚೆ ನಡೆಸಿದರು.
ಇನ್ನು ಪ್ರತಿಭಟನೆಯ ಮಧ್ಯೆ ಕೇಂದ್ರ ವಲಯದ ಐಜಿಪಿ ಲಾಬುರಾಮ್ ಅವರು ದಿಢೀರ್ ಆಗಮನ ನೀಡಿ, ಸ್ಥಳದಲ್ಲೇ ಪ್ರತಿಭಟನಾಕಾರರ ಮನವಿಯನ್ನು ಆಲಿಸಿದರು. ಶಾಸಕರ ಹಾಗೂ ರೈತ ಮುಖಂಡರೊಂದಿಗೆ ಮಾತನಾಡಿದ ಅವರು ಸಮಸ್ಯೆಯನ್ನು ಶಾಂತಿಯುತವಾಗಿ ಪರಿಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಇನ್ನು ಧರಣಿಯ ವೇಳೆ ಶಾಸಕರು “ಕೂಡಲೇ ಗೃಹ ಸಚಿವ ಜಿ. ಪರಮೇಶ್ವರ್ ಅವರೊಂದಿಗೆ ಮಾತನಾಡಿ ಎಫ್ಐಆರ್ ರದ್ದುಪಡಿಸಬೇಕೆಂದು ಆಗ್ರಹಿಸಿದ್ದೇವೆ,” ಎಂದು ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಈ ಘಟನೆ ಇದೀಗ ಜಿಲ್ಲಾದ್ಯಂತ ಸದ್ದು ಮಾಡುತ್ತಿದ್ದು, ಪೊಲೀಸ್ ಇಲಾಖೆ ಮುಂದಿನ ಕ್ರಮಗಳತ್ತ ಎಲ್ಲರ ದೃಷ್ಟಿ ನೆಟ್ಟಿದೆ.