HASSAN NEWS : ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ವರುಣನ ಅಬ್ಬರ ಮುಂದುವರಿದಿದ್ದು, ಸಕಲೇಶಪುರ, ಆಲೂರು ಹಾಗೂ ಬೇಲೂರು ಭಾಗಗಳಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯು ಸುರಿಯುತ್ತಿದೆ. ನಿರಂತರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.
ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣವಿರುವಾಗ, ಮಳೆಯ ಪ್ರಮಾಣ ಹೆಚ್ಚಾಗುತ್ತಿರುವ ಪರಿಣಾಮ ಸಕಲೇಶಪುರ ಹಾಗೂ ಚಿಕ್ಕಮಗಳೂರು ಭಾಗದಿಂದ ಹಾಸನ ತಾಲ್ಲೂಕಿನ ಗೊರೂರಿನ ಹೇಮಾವತಿ ಜಲಾಶಯಕ್ಕೆ (Hemavati Dam) ಒಳಹರಿವು ಗಣನೀಯವಾಗಿ ಹೆಚ್ಚಾಗಿದೆ. ನೆನ್ನೆಯವರೆಗೆ 1,907 ಕ್ಯೂಸೆಕ್ ಒಳಹರಿವಿದ್ದು, ಇಂದು ಅದು ಏಕಾಏಕಿ 4,642 ಕ್ಯೂಸೆಕ್ ಗೆ ಹೆಚ್ಚಾಗಿದೆ. ಒಟ್ಟಾರೆ 6,549 ಕ್ಯೂಸೆಕ್ ನೀರು ಜಲಾಶಯಕ್ಕೆ ಹರಿದುಬರುತ್ತಿದೆ ಎಂದು ಜಲಸಂಪತ್ತಿ ಇಲಾಖೆ ಮೂಲಗಳು ತಿಳಿಸಿವೆ. ಜಲಾಶಯದಿಂದ 350 ಕ್ಯೂಸೆಕ್ ನೀರನ್ನು ನದಿಗಳು ಮತ್ತು ನಾಲೆಗಳ ಮೂಲಕ ಹೊರಬಿಡಲಾಗಿದೆ.
ಪ್ರಸ್ತುತ ಪರಿಸ್ಥಿತಿಯನ್ನು ನಿಭಾಯಿಸಲು ಜಲಾಶಯದ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸುತ್ತಿದ್ದು, ತಳಭಾಗದ ಜನರಿಗೆ ಅಗತ್ಯವಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ಜನತೆ ಅಗತ್ಯವಿಲ್ಲದೆ ಮನೆ ಹೊರಗೆ ಹೋಗಬಾರದು ಎಂಬ ಕರೆ ನೀಡಲಾಗಿದೆ.