ಹಾಸನ ಜಿಲ್ಲೆಯ ಗೊರೂರು ಸಮೀಪದ Hemavati ನದಿಯಲ್ಲಿ ಈಜಲು ಇಳಿದಿದ್ದ ಬೆಂಗಳೂರು ಮೂಲದ ಮೂವರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಹಾಸನ ಜಿಲ್ಲೆಯ ಗೊರೂರು ಸಮೀಪದ Hemavati ನದಿಯಲ್ಲಿ ಭಾನುವಾರ ಹೃದಯವಿದ್ರಾವಕ ದುರಂತ ಸಂಭವಿಸಿದ್ದು, ಬೆಂಗಳೂರು ಮೂಲದ ಮೂವರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಪ್ರವಾಸದ ವೇಳೆ ಶೆಟ್ಟಿಹಳ್ಳಿ ಚರ್ಚ್ ವೀಕ್ಷಣೆಗೆ ಬಂದಿದ್ದ ಯುವಕರು ಈಜಲು ನದಿಗೆ ಇಳಿದಾಗ ಈ ಅವಘಡ ನಡೆದಿದೆ.
ಮೃತರನ್ನು ಚರಣ್ (20), ಮಿಲನ್ (23) ಮತ್ತು ಮಣಿಕಂಠ (20) ಎಂದು ಗುರುತಿಸಲಾಗಿದೆ. ಇವರು ಸ್ನೇಹಿತರೊಂದಿಗೆ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪ್ರವಾಸ ಕೈಗೊಂಡಿದ್ದು, ವಾಪಸ್ ಬರುವಾಗ ಗೂಗಲ್ ಮ್ಯಾಪ್ನಲ್ಲಿ ಪ್ರವಾಸಿ ತಾಣವನ್ನು ಹುಡುಕಿ ಶೆಟ್ಟಿಹಳ್ಳಿ ಚರ್ಚ್ ವೀಕ್ಷಿಸಲು ಗೊರೂರು ಭಾಗಕ್ಕೆ ಬಂದಿದ್ದರು.

ಒಟ್ಟು ಆರು ಯುವಕರು ಹಾಗೂ ನಾಲ್ವರು ಯುವತಿಯರು ಐದು ಸ್ಕೂಟಿಗಳಲ್ಲಿ ಪ್ರಯಾಣಿಸುತ್ತಿದ್ದರು. ಶೆಟ್ಟಿಹಳ್ಳಿ ಚರ್ಚ್ ಸಮೀಪದ ಹೇಮಾವತಿ ಹಿನ್ನೀರಿನ ಪ್ರದೇಶದಲ್ಲಿ ಮೂವರು ಯುವಕರು ಈಜಲು ನೀರಿಗೆ ಇಳಿದರೆ, ಉಳಿದ ಸ್ನೇಹಿತರು ದಡದಲ್ಲೇ ಇದ್ದರು.
ಆದರೆ, ಈಜು ಬಾರದ ಕಾರಣ ಮೂವರು ನೀರಿನಲ್ಲಿ ಮುಳುಗತೊಡಗಿದ್ದಾರೆ. ಸ್ನೇಹಿತರು ಕಿರುಚಾಡಿ ಸಹಾಯಕ್ಕಾಗಿ ಪ್ರಯತ್ನಿಸಿದರೂ, ಸ್ಥಳದಲ್ಲಿ ಬೇರೆ ಯಾರೂ ಇರಲಿಲ್ಲ. ಅಲ್ಲದೆ, ಉಳಿದವರಿಗೂ ಈಜು ಬಾರದ ಕಾರಣ ಯುವಕರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಕಾರ್ಯಾಚರಣೆಯಲ್ಲಿ ಇಬ್ಬರು ಯುವಕರ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಕತ್ತಲಾಗಿದ್ದರಿಂದ ಶೋಧ ಕಾರ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು. ಸೋಮವಾರ ಬೆಳಗ್ಗೆ ಮತ್ತೋರ್ವ ಯುವಕನ ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರಿಯಲಿದೆ.

ಗೊರೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಈ ದುರಂತದಿಂದ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ನೇಹಿತರ ವಲಯದಲ್ಲೂ ಶೋಕ ಆವರಿಸಿದೆ.




